ಬಣಕಲ್ :ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ನಯನ ಮೋಟಮ್ಮ ರವರ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.
ಗ್ರಾಮಗಳ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹಾರ ಕಂಡು ಕೊಳ್ಳುವ ವಿನೂತನ ಪ್ರಯತ್ನ ಮಾಡುವುದಕ್ಕಾಗಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುತ್ತಿದ್ದು ಸುತ್ತಮುತ್ತಲ ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು.ತಾಲೂಕಿನ ಬಣಕಲ್ ಗ್ರಾಮದಲ್ಲಿ ಆಯೋಜಿಸಿದ್ದ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ಈ ಭಾಗದ ಜನರ ಕಷ್ಟ ಸುಖಗಳನ್ನು ತಿಳಿದು ಕೊಳ್ಳಲು ಮತ್ತು ಮೂಲಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಯಾವ ಹೆಜ್ಜೆ ಇಡಬೇಕು ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ ಎಂದರು.
ಕ್ಷೇತ್ರದಲ್ಲಿನ ಕುಡಿಯುವ ನೀರು, ರಸ್ತೆ ಸೌಕರ್ಯ ಸೇರಿದಂತೆ ಹತ್ತು ಹಲವು ಉದ್ದೇಶಗಳನ್ನು ಒಳಗೊಂಡ ಯೋಜನೆಗಳನ್ನು ತಯಾರಿಸಿದ್ದು, ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು. ಈ ನಿಟ್ಟಿ ಮತ್ತಷ್ಟು ಸೌಲಭ್ಯವಂಚಿತ ಗ್ರಾಮಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು, ಜನ ಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆಯೇ ಸುರಿಯಿತು. ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಇಲ್ಲ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದೆ, ಸಮರ್ಪಕವಾದ ರಸ್ತೆ ವ್ಯವಸ್ಥೆ ಇಲ್ಲ, ಕಾಡುಪ್ರಾಣಿಗಳ ಹಾವಳಿ ತಪ್ಪಿಸಿ ಎಂಬಿತ್ಯಾದಿ ದೂರುಗಳನ್ನು ಗ್ರಾಮಸ್ಥರು ಶಾಸಕರ ನೇತೃತ್ವದಲ್ಲಿಅಧಿಕಾರಿಗಳಿಗೆ ಸಲ್ಲಿಸಿದರು. ದೂರುಗಳನ್ನು ಆಲಿಸಿದ ಶಾಸಕರು ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.