ಮೂಡಿಗೆರೆ : ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳು ಭಜರಂಗದಳ ಸಂಘಟನೆಗೆ ಸೇರಿರುವವರು ಎನ್ನುವ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಭಜರಂಗದಳದ ಸಂಯೋಜಕರು, ಆರೋಪಿಗಳಿಗೂ ಸಂಘಟನೆಗೆ ಯಾವುದೇ ಸಂಬಂಧವಿರುವುದಿಲ್ಲ. ತಪ್ಪು ಮಾಹಿತಿ ಪ್ರಚಾರ ಮಾಡುತ್ತಿರುವ ಮತ್ತು ಸಂಘಟನೆಯ ಹೆಸರನ್ನು ಬಳಸಿಕೊಂಡು ಅಕ್ರಮ ಗೋ ಸಾಗಾಟ ಮಾಡುತ್ತಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಭಜರಂಗದಳದ ಜಿಲ್ಲಾ ಸಂಯೋಜಕ ಅಭಿಷೇಕ್ ಬಣಕಲ್ ದೂರು ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಗೋ ಕಳ್ಳರು ಭಜರಂಗದಳ ಹಾಗೂ ಹಿಂದೂ ಸಂಘಟನೆಯ ಹೆಸರನ್ನು ಹೇಳಿಕೊಂಡು ಸಂಘಟನೆಗೆ ಕಪ್ಪು ಚುಕ್ಕೆ ತರುವ ಉದ್ದೇಶದಿಂದಲೇ ಇಂತಹ ಕೃತ್ಯವನ್ನು ನಡೆಸುತ್ತಿದ್ದಾರೆ, ಅನ್ಯ ಕೋವಿನವರೊಂದಿಗೆ ಕೈಜೋಡಿಸಿಕೊಂಡು ವ್ಯವಹಾರ ಮಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡರೆ ಹಿಂದೂ ಸಂಘಟನೆಯ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಇಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು,
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹಕಾರಿದರ್ಶಿ ವಿನಯ್ ಶೆಟ್ಟಿ ಮಾತನಾಡಿ ಭಯೋತ್ಪಾದಕರು ನಮ್ಮ ದೇಶದೊಳಗೆ ಪ್ರವೇಶಿಸಲು ಹಿಂದುವಿನ ವೇಷ ಹಾಕಿದ ರೀತಿಯಲ್ಲಿ ಮಲೆನಾಡು ಭಾಗದಲ್ಲಿ ಇಂತಹ ಕದಿಮರು ಬಜರಂಗದಳದ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಇಂಥವರನ್ನು ಪತ್ತೆ ಹಚ್ಚುವ ಕೆಲಸ ಮುಂದೆ ನಡೆಯಲಿದೆ, ಸಾಮಾಜಿಕ ಜಾಲತಾಣದಲ್ಲಿ ಮತ್ತು ಪತ್ರಿಕೆಯಲ್ಲಿ ತಪ್ಪು ಮಾಹಿತಿ ಬಿತ್ತರಿಸಿದ ವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದೂ ಸಂಘಟನೆ ಆಗ್ರಹಿಸಿದರು.
ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಹೋರಿ ಮತ್ತು ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಗೋಕಳ್ಳರನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುಗಳನ್ನು ನಿನ್ನೆ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರು ರಕ್ಷಣೆ ಮಾಡಿ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ. ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು. ಗೋ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.